ಚಿಕ್ಕಮಗಳೂರು, ಜುಲೈ 24: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಮಾಡಿದ ದ್ವೇಷ ಭಾಷಣ ವಿವಾದಕ್ಕೆ ಕಾರಣವಾಗಿದೆ.
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, "ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಮುಲ್ಲಾನಿಗೂ ನೀಟ್ಗೂ ಏನು ಸಂಬಂಧ?" ಎಂದು ಹೇಳಿದ್ದು, ಈ ಹೇಳಿಕೆಗೆ ಜಾಲತಾಣಗಳಲ್ಲಿ ವ್ಯಾಪಕ ಟೀಕೆ, ಆಕ್ಷೇಪ ವ್ಯಕ್ತವಾಗಿದೆ.
ನೀಟ್ ಅಕ್ರಮ ವಿರೋಧಿಸಿ ನಡೆಯುತ್ತಿರುವ ಹೋರಾಟವು ಶಿಕ್ಷಣ ಸುಧಾರಣೆಗಾಗಿ ಅಲ್ಲ ಎಂದು ಆರೋಪಿಸಿದ ಅವರು, "ಧರ್ಮೇಂದ್ರ ಪ್ರಧಾನ ಹಠಾವೋ, ಮೋದಿ ರಾಜೀನಾಮೆ ನೀಡಬೇಕು ಎಂದು ತುಕ್ಡೆ ಗ್ಯಾಂಗ್ಗಳು ಮಾತನಾಡುತ್ತಿವೆ. ಅವರಿಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿಗಿಂತ ರಾಜಕೀಯ ಉದ್ದೇಶವೇ ಹೆಚ್ಚಾಗಿದೆ" ಎಂದು ಹೇಳಿದರು.
ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕಾಂಗ್ರೆಸ್ ಬೆಂಬಲಿತ ಪ್ರತಿಭಟನೆಗಳು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ನಡೆಯುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜಕೀಯವಾಗಿ ಗುರಿಯಾಗಿಸಿಕೊಂಡು ವಿದ್ಯಾರ್ಥಿಗಳ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ನೀಟ್ ಅಕ್ರಮವನ್ನು ನೆಪವಾಗಿಸಿಕೊಂಡು ಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ರೂಪಿಸಲಾಗಿದ್ದು, ವಿದ್ಯಾರ್ಥಿಗಳ ಮೂಲಕ ದಂಗೆ ಎಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಿ.ಟಿ. ರವಿ ಹೇಳಿದರು.