ಹೊಸದಿಲ್ಲಿ: ತಡರಾತ್ರಿ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದ್ದು ದಾಳಿಯ ವಿರುದ್ಧ ಪ್ರತಿಭಟನೆ ನಡೆಸಿದ 105 ಕಾರ್ಯಕರ್ತರನ್ನು ದೇಶದಾದ್ಯಂತ ವಶಕ್ಕೆ ಪಡೆಯಲಾಗಿದೆ.
ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಇತರ ರಾಜ್ಯಗಳಲ್ಲಿರುವ ಎಸ್ಡಿಪಿಐ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ.
ಇನ್ನೂ, ಮಂಗಳೂರಿನ ಪಿಎಫ್ಐ ಕಚೇರಿ ಮೇಲೆ ಇಂದು ಬೆಳಗಿನ ಜಾವ 3.30ರ ರ ಸುಮಾರಿಗೆ ಎನ್ಐಎ ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಕಚೇರಿಗೆ ಪ್ರವೇಶಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಿಂದೂ ಸಂಘಟನೆ ಯುವ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು, ಭದ್ರತೆ ಒದಗಿಸಿದ್ದಾರೆ.
ಈ ವೇಳೆ ಗೋ ಬ್ಯಾಕ್ ಎನ್ಐಎ ಎಂದು ಪಿಎಫ್ಐ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮಾಡಿದ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.



