ಫೆ‌.27 ರಂದು ಬೆಳಗಾವಿಗೆ ಪ್ರಧಾನಿ; ಜಿಲ್ಲಾಡಳಿತದ ಭರದ ಸಿದ್ಧತೆ

A B Dharwadkar
ಫೆ‌.27 ರಂದು ಬೆಳಗಾವಿಗೆ ಪ್ರಧಾನಿ; ಜಿಲ್ಲಾಡಳಿತದ ಭರದ ಸಿದ್ಧತೆ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಳಗಾವಿ, ಫೆ.20 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಫೆಬ್ರುವರಿ 27 ರಂದು ಬೆಳಗಾವಿ ನಗರದ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದು ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದರು.

ಪ್ರಧಾನಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈಲ್ವೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಫಲಾನುಭವಿಗಳು ಸೇರಿದಂತೆ ಸುಮಾರು ಒಂದು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಗಣ್ಯರ ಭದ್ರತೆ, ವೇದಿಕೆ ನಿರ್ಮಾಣ, ಸಂಚಾರ ನಿರ್ವಹಣೆ, ಪಾರ್ಕಿಂಗ್ ವ್ಯವಸ್ಥೆ ಕುರಿತು ಚರ್ಚೆ ನಡೆಸಿದ ಅವರು, ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನೆರವೇರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

ಸಮಯಾವಕಾಶ ಕಡಿಮೆ ಇರುವುದರಿಂದ ಎಲ್ಲ ಇಲಾಖೆಯ ಅಧಿಕಾರಿಗಳು ತಮಗೆ ಒಪ್ಪಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು. ಕಾರ್ಯಕ್ರಮದ ರೂಪುರೇಷೆ ಅಂತಿಮಗೊಂಡ ಬಳಿಕ ಮತ್ತಷ್ಟು ವಿಸ್ತೃತವಾಗಿ ಚರ್ಚಿಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ನಿರ್ವಾಹಕ ಅಧಿಕಾರಿ ಹರ್ಷಲ್ ಭೋಯಾರ್, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿ ಶ್ರೀಮತಿ ಹರಿತಾ, ಡಿಸಿಪಿ ಶೇಖರ್ ಎಸ್.ಟಿ., ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಡಿಸಿಪಿ ಸ್ನೇಹಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.